ಮೈಕ್ರೋ-ಫೈನಾನ್ಸ್ ಯಿಂದ ಮಹಿಳೆಯರಿಗೆ ಕಿರುಕುಳ| ಸೂಕ್ತ ಸಂರಕ್ಷಣೆ ನೀಡಿ: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ

ವಿಜಯಪುರ: ಮೈಕ್ರೊ ಫೈನಾನ್ಸ್ ಗಳ ಹಾವಳಿಯಿಂದ ಹೆಣ್ಣು ಮಕ್ಕಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡಲು ಸೂಕ್ತಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ವಿಜಯಪುರ ನಗರದ ಜಿಪಂ ಸಭಾಂಗಣದಲ್ಲಿ ಜರುಗಿದ ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಂತೆ ವಿಜಯಪುರ ಜಿಲ್ಲೆಯಲ್ಲಿಯೂ ಸಹ ಹಲವು ಫೈನಾನ್ಸ್ ಕಂಪನಿಗಳಿಂದ ಬೆಳಿಗ್ಗೆಯಿಂದ ರಾತ್ರಿವರೆಗೂ ಮನೆಗೆ ಬಂದು ಸಾಲದ ಕಂತು ತುಂಬಿಸಿಕೊಳ್ಳಲು ಹಾಗೂ ಮರುಪಾವತಿಸುವಂತೆ ಕಿರುಕುಳ ನೀಡುತ್ತಿರುವ ಕುರಿತು ಮಹಿಳೆಯರು ದೂರು ನೀಡಿದ್ದು, ಈ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೆಯೇ ಕಾರ್ಯಸ್ಥಳದಲ್ಲಿ ಮಹಿಳೆಯರ ಮೇಲಾಗುತ್ತಿರುವ ಲೈಂಗಿಕ ಕಿರುಕುಳ ತಡೆಯಲು ಎಲ್ಲಾ ಇಲಾಖೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು. ಕಳೆದ ಎರಡು ದಿನಗಳಿಂದ ವಿಜಯಪುರ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಭೇಟಿ ಕೊಟ್ಟಾಗ, ಮಹಿಳೆಯರು ಬಹಿರ್ದೆಸೆಗೆ ಹೋದಾಗ ಕೆಲವು ಕಿಡಗೇಡಿಗಳು ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರುಗಳು ಬಂದಿದ್ದು, ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಗ್ರೂಪ್-ಡಿ ಮಹಿಳಾ ಸಿಬ್ಬಂದಿಗಳಿಗೆ ನಿಗದಿ ಪಡಿಸಿದ ವೇತನಕ್ಕೆ ಬದಲಾಗಿ ಅರ್ಧ ಸಂಬಳ ನೀಡುತ್ತಿದ್ದಾರೆ ಎಂದು ದೂರು ಬಂದಿದ್ದು, ಇಂತಹ ದೂರುಗಳಿಗೆ ಸಂಬಂದಿಸಿದ ಹಾಗೂ ಟೆಂಡರ್ ಪಡೆದಂತಹ ಏಜನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದರು. ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉದ್ಯೋಗ ದೊರೆತ್ತಿಲ್ಲ ಎಂದು ದೂರು ಬಂದಿವೆ. ಶೇ.50ರಷ್ಟು ಮಹಿಳೆಯರಿಗೆ ನರೇಗಾದಡಿ ಉದ್ಯೋಗ ನೀಡುವ ವ್ಯವಸ್ಥೆಯಾಗಬೇಕು ಮತ್ತು ವೇತನವನ್ನು ಕೂಡ ಸರಿಯಾಗಿ ನೀಡದೆ ಸತಾಯಿಸುತ್ತಾರೆಂಬ ದೂರುಗಳು ಇರುವುದರಿಂದ, ಸಂಬಂಧಿಸಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸುವಂತೆ ಎಚ್ಚರಿಕೆ ನೀಡಿದರು.
ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿ ಕಿರಾಣಿ, ಬಿಡಿ ಅಂಗಡಿ ಹಾಗೂ ಹೋಟೆಲ್ ಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿರುವುದಾಗಿ ಹೆಣ್ಣು ಮಕ್ಕಳಿಂದ ದೂರುಗಳು ಬಂದಿರುತ್ತವೆ. ಕಿರಾಣಿ, ಪಾನ್ ಶಾಪ್ ಹಾಗೂ ಹೋಟೆಲ್ ಗಳಲ್ಲಿ ಸುಲಭವಾಗಿ ಅಕ್ರಮ ಸಾರಾಯಿ ಸಿಗುವುದರಿಂದ ಗಂಡ ಕುಡಿದು ಬಂದು ಹೆಣ್ಣು ಮಕ್ಕಳಿಗೆ ತೊಂದರೆ ಕೊಡುತ್ತಾರೆ ಎಂದು ಸಾಕಷ್ಟು ಮಹಿಳೆಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಈ ಬಗ್ಗೆ ಸೂಕ್ತಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕೇವಲ ಪ್ರಾಥಮಿಕ ಶಾಲೆಗಳಿರುವುದರಿಂದ ಮುಂದಿನ ವಿದ್ಯಾಭ್ಯಾಸಕ್ಕೆ ನಗರ ಪ್ರದೇಶಗಳಿಗೆ ತಮ್ಮ ಹೆಣ್ಣು ಮಕ್ಕಳನ್ನು ಕಳುಹಿಸಲು ಹೆಚ್ಚಿನ ತಾಯಂದಿರು ಹಿಂದೇಟು ಹಾಕುತ್ತಿದ್ದಾರೆ. ಪ್ರೌಢ ಹಾಗೂ ಕಾಲೇಜು ಶಿಕ್ಷಣಗಳನ್ನು ಗ್ರಾಮಗಳಲ್ಲಿಯೇ ನೀಡಲು ವ್ಯವಸ್ಥೆ ಮಾಡಿದಲ್ಲಿ ಬಾಲ್ಯ ವಿವಾಹ ಕಡಿಮೆಯಾಗಿ ಬಾಲಕಿಯರಿಗೆ ಉನ್ನತ ಶಿಕ್ಷಣ ಪಡೆದುಕೊಳ್ಳಲು ಸಹಾಯವಾಗುತ್ತದೆ ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಳ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ, ಜಿಲ್ಲಾ ಪಂಚಾಯಿತಿ ಯೋಜಾನಾ ನಿರ್ದೇಶಕ ಬಿ.ಎಸ್. ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸಿ.ಕೆ. ಚವ್ಹಾಣ ಸೇರಿದಂತೆ ಅನೇಕರಿದ್ದರು.