ಡೋಣಿ ನದಿ ಪ್ರವಾಹ ತಡೆಗೆ ಪ್ರಾಥಮಿಕ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ
ವಿಜಯಪುರ : ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆಯನ್ನು ಸಿದ್ಧಪಡಿಸುವಂತೆ ಸಂಬಂಧಿಸಿದ ಆಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ ಹೂಳು ತುಂಬಿಕೊಂಡು ಸೇತುವೆಯ ಎತ್ತರ ಕಡಿಮೆಯಾಗಿ ನೀರಿನ ಶೇಖರಣೆ ಸಾಧ್ಯವಾಗದೇ ಇರುವುದರಿಂದ ನದಿಯಲ್ಲಿ ಹರಿಯುವ ನೀರಿನ ಒತ್ತಡ ಹೆಚ್ಚಾಗಿ ನೀರು ತನ್ನ ಪಥ ಬದಲಿಸಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಲಿರುವುದರಿಂದ ಡೋಣಿಗೆ ಸೇರುವ ಕಾಲುವೆಗಳನ್ನು ಪರಿಶೀಲನೆ ಹಾಗೂ ಡೋಣಿ ವ್ಯಾಪ್ತಿಯ ವಿವಿಧೆಡೆ ಚೆಕ್ ಡ್ಯಾಂ ನಿರ್ಮಾಣಕ್ಕೆ ಇರುವ ಅವಕಾಶÀÄ ಮತ್ತು ಡೋಣಿ ನದಿಯಿಂದ ಬೇರೆ ಕಾಲುವೆ, ಕೆರೆ-ಕಟ್ಟೆಗಳಿಗೆ ನೀರನ್ನು ಹರಿಸುವ ಸಾಧ್ಯಸಾಧ್ಯತೆ ಕುರಿತು ಪರಿಶೀಲನೆ ನಡೆಸಬೇಕು. ಡೋಣಿ ನದಿಯಲ್ಲಿ ತುಂಬಿರುವ ಹೂಳಿ ಪ್ರಮಾಣದ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಕೆಬಿಜೆಎನ್ಎಲ್ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಡೋಣಿ ನದಿಯಲ್ಲಿ ಹೂಳು ತುಂಬಿ, ಜಾಲಿ ಕಂಟಿಗಳು ಬೆಳೆದು ನೀರು ಸರಾಗವಾಗಿ ಹರಿಯದೇ ಒಂದೇ ಕಡೆ ನೀರು ಜಮಾವಣೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುವ ಕುರಿತು ರೈತರಿಗೆ ಸೂಕ್ತ ತಿಳುವಳಿಕೆ ಮೂಡಿಸಬೇಕು. ಹರನಾಳ, ಸಾರವಾಡ, ಎನ್.ಎಚ್.೨೧೮ ಹೊನಗನಹಳ್ಳಿ, ಹಿಟ್ನಳ್ಳಿ ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಜ್ಗಳ ಪ್ರದೇಶದಲ್ಲಿ ಸರ್ವೇ ಕಾರ್ಯ ಕೈಗೊಳ್ಳಬೇಕು. ಸರ್ವೇ ಕಾರ್ಯ ಪೂರ್ಣಗೊಳಿಸಿದ ನಂತರ ಅವಶ್ಯಕತೆ ಇದ್ದಲ್ಲಿ ಈ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ೧೫೦ ಮೀ. ಹೂಳು ತೆಗೆಯುವುದು, ಜಾಲಿ ಕಂಟಿಗಳನ್ನು ತೆರವುಗೊಳಿಸುವ ಕುರಿತಂತೆ ತಗಲುವ ವೆಚ್ಚ ಸೇರಿದಂತೆ ಮುಂಚಿತವಾಗಿಯೇ ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಯಾವುದೇ ಸಮಸ್ಯೆ ಎದುರಾದರೂ ಕೈಗೊಳ್ಳಬಹುದಾದ ಪರಿಹಾರ ಕುರಿತು ಮುಂಚಿತವಾಗಿಯೇ ಸಿದ್ಧತೆ ಮಾಡಿಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.
ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ವಿವಿಧ ಇಲಾಖೆಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಿಕೊಂಡು ಸಮಿತಿಯ ಸಲಹೆ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನರೇಗಾ ಯೋಜನೆಯಡಿ ಹರನಾಳ, ಸಾರವಾಡ, ಎನ್.ಎಚ್.೨೧೮ ಹೊನಗನಹಳ್ಳಿ, ಹಿಟ್ನಳ್ಳಿ ಡೋಣಿ ನದಿಯ ಹೂಳು ತೆಗೆಯುವ ಸಾಧ್ಯಸಾಧ್ಯತೆ ಕುರಿತು ಪರಿಶೀಲನೆ ನಡೆಸಬೇಕು. ತೆಗೆದ ಹೂಳು ಕೃಷಿ ಬಳಕೆಗೆ ಯೋಗ್ಯವೇ ಎಂಬುದನ್ನು ಕೃಷಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಸಲಹೆ ಒದಗಿಸಬೇಕು. ನೀರು ಹರಿಯುವ ಪ್ರಮಾಣ ಕಡಿಮೆ ಇರುವ ಸಂದರ್ಭದಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವ ಮುಂಚಿತವಾಗಿಯೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಕ್ರೀಯಾಯೋಜನೆ ಸಿದ್ಧಪಡಿಸಿಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿನ ಡೋಣಿನದಿ ಪ್ರವಾಹ ತಡೆ ಕುರಿತು ಸುರ್ದಿರ್ಘ ಎರಡು ಗಂಟೆಗಳ ಕಾಲ ರೈತರು, ಜಲಬಿರಾದಾರಿ ಸಂಘಟನೆಯವರು, ವಿವಿಧ ಅಧಿಕಾರಿಗಳೊಂದಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಯಿತು.
ಡೋಣಿ ನದಿಯಲ್ಲಿ ಪ್ರವಾಹ ಉಂಟಾಗುವ ವಿವಿಧ ಕಾರಣಗಳ ಕುರಿತು ಕೆಬಿಜೆಎನ್ಎಲ್ ಉಪಮುಖ್ಯ ಅಭಿಯಂತರ ಸುಧೀರ ಸಜ್ಜನ ಅವರು ಪಿಪಿಟಿ ಮೂಲಕ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕೆಬಿಜೆಎನ್ಎಲ್ ನಾರಾಯಣಪುರ ಅಧೀಕ್ಷಕ ಅಭಿಯಂತರ ಮಂಜುನಾಥ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಲ್.ರೂಪಾ, ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಕುಂಬಾರ, ಪಿಆರ್ಇಡಿ ಕಾರ್ಯನಿರ್ವಾಹಕ ಅಭಿಯಂತರ ನಬಿಲಾಲ ಗಬಸಾವಳಗಿ, ಭೂಮಾಪನ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.